ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ನಲ್ಲಿ ಕರ್ನಾಟಕಕ್ಕೆ ಜಯ: ತಮಿಳುನಾಡು ಅರ್ಜಿ ವಜಾ
- sathyapathanewsplu
- Nov 14
- 1 min read

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯಕ್ಕೆ ಸುಪ್ರೀಂ ಕೋರ್ಟ್ನಲ್ಲಿ ಮಹತ್ವದ ಜಯ ದೊರೆತಿದೆ. ಈ ಯೋಜನೆಗೆ ಅಡ್ಡಗಾಲು ಹಾಕಿ ತಮಿಳುನಾಡು ಸರ್ಕಾರವು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯವು ಇದೀಗ ವಜಾಗೊಳಿಸಿದೆ. ನ್ಯಾಯಾಲಯದ ಈ ನಿರ್ಧಾರದಿಂದ ಕಳೆದ ಏಳು ವರ್ಷಗಳಿಂದ ಯೋಜನೆಯ ಅನುಷ್ಠಾನಕ್ಕೆ ಎದುರಾಗಿದ್ದ ಬಹುದೊಡ್ಡ ಕಾನೂನು ತೊಡಕು ನಿವಾರಣೆಯಾದಂತಾಗಿದೆ. ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ, ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ.
ಕಳೆದ ಸುಮಾರು ಏಳು ವರ್ಷಗಳಿಂದ ತಮಿಳುನಾಡು ರಾಜ್ಯವು ಮೇಕೆದಾಟು ಯೋಜನೆ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಯೋಜನೆಯ ಕಾರ್ಯಾರಂಭಕ್ಕೆ ತಡೆಯೊಡ್ಡಿತ್ತು. ಈ ಕುರಿತು ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ತಮಿಳುನಾಡು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಈ ಯೋಜನೆಯು ಇನ್ನೂ ಆರಂಭಿಕ ಹಂತದಲ್ಲಿರುವುದರಿಂದ ಮತ್ತು ನಿರ್ಮಾಣ ಕಾರ್ಯ ಪ್ರಾರಂಭವಾಗಿಲ್ಲದ ಕಾರಣ ನ್ಯಾಯಾಲಯವು ಮಧ್ಯಪ್ರವೇಶಿಸಲು ನಿರಾಕರಿಸಿದೆ. ಈ ಮೂಲಕ ಕಾವೇರಿ ಕಣಿವೆಯಲ್ಲಿ ಜಲಸಂಪನ್ಮೂಲ ನಿರ್ವಹಣೆಗೆ ಸಂಬಂಧಿಸಿದ ಪ್ರಮುಖ ಯೋಜನೆಯಾದ ಮೇಕೆದಾಟು ಜಲಾಶಯ ಯೋಜನೆಗೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ನಲ್ಲಿ ಜಯ ಲಭಿಸಿದಂತಾಗಿದೆ.
ಸದ್ಯ ಮೇಕೆದಾಟು ಯೋಜನೆಯು ಇನ್ನು ಆರಂಭಿಕ ಹಂತದಲ್ಲಿದ್ದು, ಯಾವುದೇ ನಿರ್ಮಾಣ ಕಾರ್ಯ ಪ್ರಾರಂಭವಾಗಿಲ್ಲ ಎಂಬುದನ್ನು ನ್ಯಾಯಾಲಯ ಗಮನಿಸಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮತ್ತು ಕೇಂದ್ರ ಜಲ ಆಯೋಗದಂತಹ (CWC) ತಜ್ಞ ಸಂಸ್ಥೆಗಳು ಈಗಾಗಲೇ ಪರಿಶೀಲನೆ ನಡೆಸುತ್ತಿವೆ. ತಜ್ಞ ಸಂಸ್ಥೆಗಳ ಪರಿಶೀಲನೆಯಲ್ಲಿರುವ ಯೋಜನೆಯ ಬಗ್ಗೆ ಈ ಹಂತದಲ್ಲಿ ಮಧ್ಯಪ್ರವೇಶ ಮಾಡುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟ ಸುಪ್ರೀಂ ಕೋರ್ಟ್, ತಮಿಳುನಾಡು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ. ಈ ತೀರ್ಪು ಕರ್ನಾಟಕದ ಪಾಲಿಗೆ ಯೋಜನೆಯ ಅನುಷ್ಠಾನದ ದೃಷ್ಟಿಯಿಂದ ಮಹತ್ವದ್ದಾಗಿದೆ.






Comments