ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್ತೆ: ತನಿಖೆಗೆ ಸ್ಪೀಕರ್ ಯು.ಟಿ. ಖಾದರ್ ಸೂಚನೆ
- Mar 5
- 1 min read

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪದ ನೇತ್ರಾವತಿ ನದಿ ತೀರದಲ್ಲಿ ನೂರಾರು ಆಧಾರ್ ಕಾರ್ಡ್ಗಳು ಅನಾಥವಾಗಿ ಬಿದ್ದಿರುವುದು ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ಮೂಡಿಸಿದೆ. ಪುದು ಗ್ರಾಮದ ನಿವಾಸಿಗಳ ವಿಳಾಸ ಹೊಂದಿರುವ ಈ ಕಾರ್ಡ್ಗಳು ನದಿಯಲ್ಲಿ ತೇಲಿ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಗ್ರಾಮ ಪಂಚಾಯತ್ ಗಮನಕ್ಕೆ ತಂದಿದ್ದಾರೆ. ಸರ್ಕಾರದ ಪ್ರಮುಖ ಗುರುತಿನ ಚೀಟಿಗಳು ಹೀಗೆ ನದಿ ಪಾಲಾಗಿರುವುದು ವ್ಯವಸ್ಥೆಯ ಬೇಜವಾಬ್ದಾರಿತನಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಸ್ಥಳೀಯರು ಆಪಾದಿಸಿದ್ದಾರೆ.
ಈ ಗಂಭೀರ ಘಟನೆಯನ್ನು ಗಮನಿಸಿದ ಸ್ಥಳೀಯ ಶಾಸಕ ಹಾಗೂ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಕೂಡಲೇ ತನಿಖೆಗೆ ಆದೇಶಿಸಿದ್ದಾರೆ. ಇಷ್ಟೊಂದು ಪ್ರಮಾಣದ ಆಧಾರ್ ಕಾರ್ಡ್ಗಳು ನದಿ ತಟಕ್ಕೆ ಬರಲು ಕಾರಣವೇನು ಮತ್ತು ಇದರ ಹಿಂದೆ ಇರುವ ವ್ಯಕ್ತಿಗಳ ಯಾರು ಎಂಬುದನ್ನು ಪತ್ತೆಹಚ್ಚುವಂತೆ ಯುಐಡಿಎಐ (UIDAI) ಯೋಜನಾ ವ್ಯವಸ್ಥಾಪಕರಿಗೆ ಪತ್ರ ಬರೆದಿದ್ದಾರೆ. ಸಾರ್ವಜನಿಕರ ವೈಯಕ್ತಿಕ ಮಾಹಿತಿ ಇರುವ ದಾಖಲೆಗಳನ್ನು ದುರುಪಯೋಗ ಪಡಿಸಿಕೊಂಡ ಅಥವಾ ನಿರ್ಲಕ್ಷ್ಯ ವಹಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಇನ್ನೊಂದೆಡೆ, ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಮಾತನಾಡಿ, "ಅಂಚೆ ಮೂಲಕ ಬರಬೇಕಿದ್ದ ಕಾರ್ಡ್ಗಳು ಜನರಿಗೆ ತಲುಪದ ಕಾರಣ, ಅನೇಕರು ಸೈಬರ್ ಕೇಂದ್ರಗಳಲ್ಲಿ ಹಣ ನೀಡಿ ಪ್ರತಿಗಳನ್ನು ಪಡೆಯುವಂತಾಗಿತ್ತು. ಈಗ ಆ ಕಾರ್ಡ್ಗಳು ನದಿಯಲ್ಲಿ ಪತ್ತೆಯಾಗಿರುವುದು ಅಂಚೆ ಇಲಾಖೆಯ ನಿರ್ಲಕ್ಷ್ಯವನ್ನು ತೋರಿಸುತ್ತಿದೆ," ಎಂದು ಕಿಡಿಕಾರಿದ್ದಾರೆ. ಈ ಬಗ್ಗೆ ಮಂಗಳೂರು ಅಂಚೆ ವಿಭಾಗದ ಉಪಾಧೀಕ್ಷಕ ದಿನೇಶ್ ಪ್ರತಿಕ್ರಿಯಿಸಿದ್ದು, ಗುರುವಾರ ಅಂಚೆ ನಿರೀಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಮತ್ತು ವರದಿ ಆಧರಿಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಅಂಚೆ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.







Comments