ಅಂಗನವಾಡಿ ಪೌಷ್ಟಿಕ ಆಹಾರದ ಪ್ಯಾಕೆಟ್ನಲ್ಲಿ ಸತ್ತ ಹಾವಿನ ಮರಿ ಪತ್ತೆ: ತನಿಖೆಗೆ ಆದೇಶ
- Jun 8
- 1 min read

ಮಧ್ಯಪ್ರದೇಶದ ಪಾಂಡುರ್ಣ ಜಿಲ್ಲೆಯ ಕಾರ್ಘಾಟ್ ಕಮಠಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಯೊಬ್ಬರಿಗೆ ನೀಡಲಾದ ಪೌಷ್ಟಿಕ ಆಹಾರದ ಪ್ಯಾಕೆಟ್ನಲ್ಲಿ ಸತ್ತ ಹಾವಿನ ಮರಿ ಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ವಚಲಾ ಬಾಯಿ ಧುರ್ವೆ ಎಂಬ ಗರ್ಭಿಣಿ ಮಹಿಳೆ ತಮಗೆ ವಿತರಿಸಲಾಗಿದ್ದ ಲಡ್ಡುಗಳ ಪ್ಯಾಕೆಟ್ ಅನ್ನು ಮನೆಗೆ ತಂದು ತೆರೆದಾಗ ಈ ಭೀಕರ ದೃಶ್ಯ ಬೆಳಕಿಗೆ ಬಂದಿದೆ. ಇದರಿಂದ ಆತಂಕಗೊಂಡ ಕುಟುಂಬಸ್ಥರು ತಕ್ಷಣವೇ ಅಂಗನವಾಡಿ ಸಿಬ್ಬಂದಿ ಮತ್ತು ಸ್ಥಳೀಯ ಆಡಳಿತಕ್ಕೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಅಧಿಕಾರಿಗಳು ಸದರಿ ಆಹಾರದ ಪ್ಯಾಕೆಟ್ ಅನ್ನು ವಶಕ್ಕೆ ಪಡೆದುಕೊಂಡಿದ್ದು, ಘಟನೆಯ ಸಂಪೂರ್ಣ ತನಿಖೆಗಾಗಿ ಐದು ಸದಸ್ಯರ ವಿಶೇಷ ಸಮಿತಿಯನ್ನು ರಚಿಸಿದ್ದಾರೆ. ಲಡ್ಡುಗಳ ಆಹಾರದ ಮಾದರಿಯನ್ನು ಹೆಚ್ಚಿನ ಪರೀಕ್ಷೆಗಾಗಿ ಭೋಪಾಲ್ನ ರಾಜ್ಯ ಆಹಾರ ಪರೀಕ್ಷಾ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದ್ದು, ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಈ ಬೇಜವಾಬ್ದಾರಿತನದ ಘಟನೆಯಿಂದ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗರ್ಭಿಣಿಯರು ಮತ್ತು ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಇಲಾಖೆಯ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಅಂಗನವಾಡಿ ಕೇಂದ್ರಗಳ ಮೂಲಕ ವಿತರಿಸಲಾಗುವ ಪೌಷ್ಟಿಕ ಆಹಾರದ ಗುಣಮಟ್ಟವನ್ನು ಅಧಿಕಾರಿಗಳು ನಿಯಮಿತವಾಗಿ ಕಟ್ಟುನಿಟ್ಟಾಗಿ ಪರಿಶೀಲಿಸಬೇಕು ಮತ್ತು ಈ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಮತ್ತು ಗ್ರಾಮಸ್ಥರು ಆಗ್ರಹಿಸಿದ್ದಾರೆ.







Comments