ತಮಿಳುನಾಡು ರಾಜಕೀಯದಲ್ಲಿ ಸಂಚಲನ: ಅಣ್ಣಾಮಲೈ ಹೊಸ ಪಕ್ಷ ಸ್ಥಾಪನೆ ಸಾಧ್ಯತೆ?
- Jun 1
- 1 min read

ಚೆನ್ನೈ, ಜೂನ್ 1: ತಮಿಳುನಾಡಿನ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾದ ಬೆಳವಣಿಗೆಯಲ್ಲಿ, ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಪಕ್ಷವನ್ನು ತೊರೆದು ಹೊಸ ರಾಜಕೀಯ ಸಂಘಟನೆಯನ್ನು ಆರಂಭಿಸುವ ಸಾಧ್ಯತೆ ಇದೆ ಎಂಬ ಸುದ್ದಿ ಹರಿದಾಡುತ್ತಿದೆ.
ಆಪ್ತ ಮೂಲಗಳ ಪ್ರಕಾರ, ಅಣ್ಣಾಮಲೈ ಅವರು ಬಿಜೆಪಿ ನಾಯಕರೊಂದಿಗೆ ಉಂಟಾದ ಅಸಮಾಧಾನದ ಹಿನ್ನೆಲೆಯಲ್ಲಿ ಸ್ವಂತ ರಾಜಕೀಯ ವೇದಿಕೆ ರೂಪಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಜೂನ್ 3 ರಂದು ಅವರು ನಡೆಸಲಿರುವ ಸುದ್ದಿಗೋಷ್ಠಿಯಲ್ಲಿ ತಮ್ಮ ಮುಂದಿನ ರಾಜಕೀಯ ನಡೆ ಕುರಿತು ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಅಣ್ಣಾಮಲೈ ಬಿಜೆಪಿ ತೊರೆಯುವ ಸಾಧ್ಯತೆ ಬಗ್ಗೆ ನಿಮ್ಮ ಅಭಿಪ್ರಾಯವೇನು?
0%ಹೌದು, ಹೊಸ ಪಕ್ಷ ಸ್ಥಾಪಿಸುತ್ತಾರೆ
0%ಇಲ್ಲ, ಬಿಜೆಪಿಯಲ್ಲೇ ಉಳಿಯುತ್ತಾರೆ
ಇತ್ತೀಚೆಗೆ ಅಣ್ಣಾಮಲೈ ಅವರ ಸ್ಥಾನಕ್ಕೆ ನೈನಾರ್ ನಾಗೇಂದ್ರನ್ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಇದರ ನಡುವೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕೇವಲ ಒಂದು ಸ್ಥಾನಕ್ಕೆ ಸೀಮಿತವಾಗಿರುವುದು ಪಕ್ಷದ ಒಳಾಂಗಣದಲ್ಲಿ ಚರ್ಚೆಗೆ ಕಾರಣವಾಗಿದೆ.
ಅಸಮಾಧಾನದ ಹಿನ್ನೆಲೆ ಅಣ್ಣಾಮಲೈ ಅವರು ಸಿಬಿಎಸ್ಇ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಜಾರಿಗೆ ತಂದ ‘ತ್ರಿಭಾಷಾ ಸೂತ್ರ’ವನ್ನು ತೀವ್ರವಾಗಿ ವಿರೋಧಿಸಿದ್ದರು. ಇದು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಅನಗತ್ಯ ಮಾನಸಿಕ ಒತ್ತಡವನ್ನುಂಟುಮಾಡುತ್ತದೆ ಎಂದು ಅವರು ಬಹಿರಂಗವಾಗಿ ಟೀಕಿಸಿದ್ದರು.
ಇದೇ ವೇಳೆ, ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಮರುಸ್ಥಾಪನೆಗೂ ಅವರು ಅಸಮಾಧಾನಗೊಂಡಿದ್ದರು ಎಂಬ ವರದಿಗಳಿವೆ. ಆದಾಗ್ಯೂ, ಪಕ್ಷದ ಉನ್ನತ ನಾಯಕರ ಸೂಚನೆಯಂತೆ ಅವರು ಎನ್ಡಿಎ ಪರವಾಗಿ ಪ್ರಚಾರ ಕಾರ್ಯದಲ್ಲಿ ಸಕ್ರಿಯರಾಗಿದ್ದರು.
ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ತೀವ್ರ ಅಣ್ಣಾಮಲೈ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಪಕ್ಷದ ಹೆಸರುಗಳು ಹಾಗೂ ಧ್ವಜ ವಿನ್ಯಾಸಗಳನ್ನು ಹಂಚಿಕೊಳ್ಳುತ್ತಿದ್ದು, ಹೊಸ ರಾಜಕೀಯ ಪಕ್ಷದ ಸ್ಥಾಪನೆ ಬಗ್ಗೆ ಊಹಾಪೋಹಗಳಿಗೆ ಇನ್ನಷ್ಟು ಬಲ ನೀಡುತ್ತಿದ್ದಾರೆ.
ಬಿಜೆಪಿ ಪ್ರತಿಕ್ರಿಯೆ ಈ ಎಲ್ಲ ಬೆಳವಣಿಗೆಗಳ ನಡುವೆ, ತಮಿಳುನಾಡಿನ ಹಿರಿಯ ಬಿಜೆಪಿ ನಾಯಕರು ಈ ವದಂತಿಗಳನ್ನು ತಳ್ಳಿಹಾಕಿದ್ದಾರೆ. “ಅಣ್ಣಾಮಲೈ ಅವರು ಪಕ್ಷ ತೊರೆಯುತ್ತಿದ್ದಾರೆ ಅಥವಾ ಹೊಸ ಪಕ್ಷ ಸ್ಥಾಪನೆಗೆ ಮುಂದಾಗಿದ್ದಾರೆ ಎಂಬುದಕ್ಕೆ ಯಾವುದೇ ಮಾಹಿತಿ ಇಲ್ಲ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಮುಂದಿನ ಕೆಲವು ದಿನಗಳಲ್ಲಿ ಅಣ್ಣಾಮಲೈ ಅವರ ನಿರ್ಧಾರ ತಮಿಳುನಾಡು ರಾಜಕೀಯದ ದಿಕ್ಕನ್ನು ನಿರ್ಧರಿಸುವುದಾಗಿ ರಾಜಕೀಯ ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ.







Comments