ಬಂಟ್ವಾಳ: ಕಾರು-ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸಾವು, ಪೊಲೀಸ್ ಸಿಬ್ಬಂದಿ ವಿರುದ್ಧ ಮದ್ಯಪಾನದ ಆರೋಪ
- sathyapathanewsplu
- Dec 30, 2025
- 1 min read

ಬಂಟ್ವಾಳ: ತಾಲೂಕಿನ ಪಿಲಾತಬೆಟ್ಟು ಕಟ್ಟೆಮನೆ ಪ್ರದೇಶದಲ್ಲಿ ಡಿಸೆಂಬರ್ 29ರಂದು ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಇಮ್ರಾನ್ (ಎಸ್.ಎ. ಮೊಹಮ್ಮದ್ ತಾಹ) ಎಂದು ಗುರುತಿಸಲಾಗಿದೆ. ಇಮ್ರಾನ್ ಸಂಚರಿಸುತ್ತಿದ್ದ ಬೈಕ್ ಹಾಗೂ ಪ್ರಸನ್ನ ಎಂಬವರು ಚಲಾಯಿಸುತ್ತಿದ್ದ ನ್ಯಾನೋ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇಮ್ರಾನ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯಡಿ ಪ್ರಕರಣ ದಾಖಲಾಗಿದೆ.
ಈ ಘಟನೆಯಲ್ಲಿ ಕಾರು ಚಾಲನೆ ಮಾಡುತ್ತಿದ್ದ ಪ್ರಸನ್ನ ಅವರು ದಕ್ಷಿಣ ಕನ್ನಡ ಜಿಲ್ಲಾ ಡಿ.ಸಿ.ಆರ್.ಇ ಘಟಕದ ಪೊಲೀಸ್ ಸಿಬ್ಬಂದಿ ಎಂದು ತಿಳಿದುಬಂದಿದೆ. ಅಪಘಾತದ ಸಮಯದಲ್ಲಿ ಚಾಲಕ ಮದ್ಯಪಾನ ಮಾಡಿದ್ದರು ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಈ ಆರೋಪವು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಪೊಲೀಸ್ ಇಲಾಖೆಯ ಮೇಲಿನ ಒತ್ತಡವನ್ನು ಹೆಚ್ಚಿಸಿದೆ.
ಸಾರ್ವಜನಿಕರ ಆಕ್ರೋಶ ಮತ್ತು ಆರೋಪಗಳ ಹಿನ್ನೆಲೆಯಲ್ಲಿ ಪುಂಜಾಲಕಟ್ಟೆ ಪೊಲೀಸರು ಆರೋಪಿತ ಪ್ರಸನ್ನ ಅವರಿಗೆ ಆಲೋಮೀಟರ್ ಪರೀಕ್ಷೆ ನಡೆಸಿದ್ದಾರೆ. ಮೃತರ ಸಂಬಂಧಿಕರು ಹಾಗೂ ವಿಡಿಯೋ ಪ್ರಸಾರ ಮಾಡಿದ ಮಹಿಳೆಯ ಸಮ್ಮುಖದಲ್ಲೇ ನಡೆದ ಈ ಪರೀಕ್ಷೆಯಲ್ಲಿ ಮದ್ಯಪಾನ ಮಾಡಿರುವುದು ದೃಢಪಟ್ಟಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಆದರೂ, ಹೆಚ್ಚಿನ ಖಚಿತತೆಗಾಗಿ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.






Comments