ಬಂಟ್ವಾಳ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಹತ್ಯೆ
- 12 minutes ago
- 1 min read

ಮಾರಕ ಆಯುಧದಿಂದ ದಾಳಿ; ಆರೋಪಿಯ ಪತ್ತೆಗೆ ಪೊಲೀಸರ ಶೋಧ
ಬಂಟ್ವಾಳ: ಬಂಟ್ವಾಳ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಯುವತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ನಡೆದಿದೆ. ಮೃತರನ್ನು ಕಕ್ಯಪದವು ನಿವಾಸಿ ಲಾವಣ್ಯ (ಹೆಸರು ತಿಳಿಸಿದಂತೆ) ಎಂದು ಗುರುತಿಸಲಾಗಿದೆ.
ಲಾವಣ್ಯ ಅವರು ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕಕ್ಯಪದವು ಕಡೆಗೆ ತೆರಳಲು ಅವರು ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ತಮ್ಮ ಸಂಬಂಧಿಕರೊಬ್ಬರಿಗೆ ಕರೆ ಮಾಡಿ, ತಮ್ಮ ಪಕ್ಕದಲ್ಲಿ ಅಪರಿಚಿತ ಯುವಕನೊಬ್ಬ ಕುಳಿತಿದ್ದಾನೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಬಳಿಕ ಕರೆ ಸಂಪರ್ಕ ಕಡಿತಗೊಂಡಿತ್ತು ಎಂದು ತಿಳಿದುಬಂದಿದೆ.
ಪ್ರಯಾಣಿಕರ ಮಾಹಿತಿಯಂತೆ, ಕೆಲ ಸಮಯದ ಬಳಿಕ ಲಾವಣ್ಯ ಅವರು ಬಸ್ನಿಂದ ಇಳಿದಿದ್ದಾರೆ. ಈ ಸಂದರ್ಭದಲ್ಲಿ ಅವರ ಹಿಂದೆ ಬಂದ ಯುವಕನೊಬ್ಬ ಬ್ಯಾಗ್ನಿಂದ ಹರಿತವಾದ ಆಯುಧವನ್ನು ತೆಗೆದು ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ದಾಳಿಯಿಂದ ತಪ್ಪಿಸಿಕೊಳ್ಳಲು ಯುವತಿ ಪ್ರಯತ್ನಿಸಿದರೂ, ಆರೋಪಿ ಮಾರಕವಾಗಿ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಘಟನೆಯಿಂದ ಬಸ್ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ಪಡೆದ ಬಂಟ್ವಾಳ ಉಪವಿಭಾಗದ ಪೊಲೀಸ್ ಅಧಿಕಾರಿಗಳು, ನಗರ ಠಾಣೆಯ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ. ಘಟನೆಯ ಹಿಂದಿನ ಕಾರಣ ಹಾಗೂ ಆರೋಪಿಯ ಹಿನ್ನೆಲೆ ಕುರಿತು ತನಿಖೆ ಮುಂದುವರಿದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ. ಘಟನೆಯ ಹಿನ್ನೆಲೆ ಹಾಗೂ ಆರೋಪಿಯ ಗುರುತು ಕುರಿತು ತನಿಖೆ ಮುಂದುವರಿದಿದೆ.







Comments