;
top of page

ಬಳ್ಳಾರಿ ಬ್ಯಾನರ್ ಗಲಾಟೆ ಮಾಸುವ ಮುನ್ನವೇ ರೆಡ್ಡಿ–ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್‌ಗೆ ಬೆಂಕಿ

  • Writer: sathyapathanewsplu
    sathyapathanewsplu
  • Jan 24
  • 2 min read

ರಾಜ್ಯ ರಾಜಕಾರಣದಲ್ಲಿ ಮತ್ತೆ ಭಾರೀ ಸಂಚಲನ

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ನಡೆದ ಬ್ಯಾನರ್ ಗಲಾಟೆ ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಗುಂಡೇಟಿಗೆ ಬಲಿಯಾದ ಪ್ರಕರಣ ಇನ್ನೂ ಮಾಸುವ ಮುನ್ನವೇ ಮತ್ತೊಂದು ಗಂಭೀರ ಘಟನೆ ನಡೆದಿದೆ. ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ಬಿ. ಶ್ರೀರಾಮುಲು ಅವರಿಗೆ ಸೇರಿದ ಜಿ–ಸ್ಕ್ವೇರ್ ಲೇಔಟ್‌ನಲ್ಲಿರುವ ಮಾಡೆಲ್ ಹೌಸ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಬೆಳಕಿಗೆ ಬಂದಿದೆ.

ಈ ಅಗ್ನಿ ಅವಘಡದ ಹಿಂದೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಶಾಸಕರ ಬೆಂಬಲಿಗರೇ ಇದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಅಲ್ಲೋಲ–ಕಲ್ಲೋಲ ಸೃಷ್ಟಿಸುವ ಸಾಧ್ಯತೆ ಇದೆ.

13–14 ವರ್ಷಗಳ ಹಿಂದಿನ ಮಾಡೆಲ್ ಹೌಸ್

ಬೆಂಕಿಗೆ ಆಹುತಿಯಾದ ಈ ಮಾಡೆಲ್ ಹೌಸ್ ಗಾಲಿ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಇಬ್ಬರ ಹೆಸರಿನಲ್ಲಿದ್ದು, ಸುಮಾರು 13–14 ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿದೆ. ಒಟ್ಟು 109 ಎಕರೆ ವಿಸ್ತೀರ್ಣದ ಜಿ–ಸ್ಕ್ವೇರ್ ಲೇಔಟ್‌ನಲ್ಲಿ ಖರೀದಿದಾರರಿಗೆ ತೋರಿಸುವ ಉದ್ದೇಶದಿಂದ ಈ ಮಾಡೆಲ್ ಹೌಸ್ ನಿರ್ಮಿಸಲಾಗಿತ್ತು.

ಸೋಮಶೇಖರ್ ರೆಡ್ಡಿಯಿಂದ ಸ್ಫೋಟಕ ಆರೋಪ

ಈ ಘಟನೆ ಕುರಿತು ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ತೀವ್ರ ಪ್ರತಿಕ್ರಿಯೆ ನೀಡಿದ್ದು, “ಬ್ಯಾನರ್ ಗಲಾಟೆ ವೇಳೆ ಬೆಂಕಿ ಹಚ್ಚುತ್ತೇವೆ ಎಂದು ಬೆದರಿಕೆ ಹಾಕಲಾಗಿತ್ತು. ಅದರ ಸಾಕ್ಷಿಯಂತೆಯೇ ಈಗ ನಮ್ಮ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಲಾಗಿದೆ. ಇಂದು (ಜನವರಿ 23) ಸಂಜೆ ಸುಮಾರು 6.30ರ ಸುಮಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿದೆ” ಎಂದು ಆರೋಪಿಸಿದರು.

“ನೂರು ಎಕರೆ ಪ್ರದೇಶದಲ್ಲಿ ಲೇಔಟ್ ಮಾಡಲಾಗಿತ್ತು. ಖರೀದಿದಾರರಿಗೆ ತೋರಿಸಲು ಮಾಡೆಲ್ ಹೌಸ್ ನಿರ್ಮಿಸಿದ್ದೆವು. ಬೆಂಕಿ ಹಚ್ಚಿದವರನ್ನು ಹಿಡಿಯಲು ಕೆಲವರು ಯತ್ನಿಸಿದರೂ ಅವರು ಪರಾರಿಯಾಗಿದ್ದಾರೆ” ಎಂದು ಸೋಮಶೇಖರ್ ರೆಡ್ಡಿ ತಿಳಿಸಿದ್ದಾರೆ.

ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಬೆಂಬಲಿಗರ ಮೇಲೆ ಆರೋಪ

ಬೆಂಕಿ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಬೆಂಬಲಿಗರೇ ಈ ಕೃತ್ಯ ಎಸಗಿದ್ದಾರೆ ಎಂದು ರೆಡ್ಡಿ ಕುಟುಂಬ ಆರೋಪಿಸಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶೀಘ್ರದಲ್ಲೇ ಪೊಲೀಸ್ ಠಾಣೆಗೆ ದೂರು ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.

ಜನಾರ್ದನ ರೆಡ್ಡಿಯ ಪ್ರತಿಕ್ರಿಯೆ

ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಗಾಲಿ ಜನಾರ್ದನ ರೆಡ್ಡಿ, “ಬ್ಯಾನರ್ ಗಲಾಟೆಯಾಗಿ ಇನ್ನೂ 15 ದಿನಗಳು ಕೂಡ ಆಗಿಲ್ಲ. ಅದಕ್ಕಿಂತ ಮುಂಚೆಯೇ ಇಂತಹ ಘಟನೆ ನಡೆದಿದೆ. ಈ ಬಗ್ಗೆ 7 ಎಸ್‌ಪಿ ಜೊತೆ ನಾನು ಮಾತನಾಡಿದ್ದೇನೆ” ಎಂದು ಹೇಳಿದರು.

ತನಿಖೆ ಚುರುಕು

ಇನ್ನು ಬ್ಯಾನರ್ ಗಲಾಟೆ ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ್ದು, ತನಿಖೆ ಚುರುಕುಗೊಂಡಿದೆ. ಅದರ ನಡುವೆ ನಡೆದ ಈ ಬೆಂಕಿ ಪ್ರಕರಣ ರಾಜಕೀಯ ಸಂಘರ್ಷವನ್ನು ಇನ್ನಷ್ಟು ತೀವ್ರಗೊಳಿಸುವ ಸಾಧ್ಯತೆ ಇದೆ.

ಒಟ್ಟಾರೆ, ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆಯ ಬೆನ್ನಲ್ಲೇ ರೆಡ್ಡಿ–ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್‌ಗೆ ಬೆಂಕಿ ಬಿದ್ದಿರುವುದು ರಾಜ್ಯ ರಾಜಕಾರಣದಲ್ಲಿ ಹೊಸ ತಿರುವು ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಪ್ರಕರಣ ಇನ್ನಷ್ಟು ದೊಡ್ಡ ಸ್ವರೂಪ ಪಡೆಯುವ ಲಕ್ಷಣಗಳು ಕಾಣಿಸುತ್ತಿವೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page