ಬೆಳ್ತಂಗಡಿಯಲ್ಲಿ ಲೋಕಾಯುಕ್ತ ದಾಳಿ: ಕುವೆಟ್ಟು, ಮಡಂತ್ಯಾರು ಗ್ರಾ.ಪಂ. ಕಚೇರಿಗಳಲ್ಲಿ ಕಡತಗಳ ಪರಿಶೀಲನೆ

ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಮತ್ತು ಮಡಂತ್ಯಾರು ಗ್ರಾಮ ಪಂಚಾಯತ್ ಕಚೇರಿಗಳ ಮೇಲೆ ಮಂಗಳವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.
ಗ್ರಾಮ ಪಂಚಾಯತ್ಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಲೋಕಾಯುಕ್ತ ಕೇಂದ್ರ ಕಚೇರಿಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಉಡುಪಿ ಜಿಲ್ಲೆಯ ಲೋಕಾಯುಕ್ತ ಇನ್ಸ್ಪೆಕ್ಟರ್ ಮಂಜುನಾಥ್ ಶಂಕರಹಳ್ಳಿ ನೇತೃತ್ವದಲ್ಲಿ ರಾಘವೇಂದ್ರ ಸಾಲಿಗ್ರಾಮ, ಆದರ್ಶ್, ಅರುಣ್ ಕುಮಾರ್, ಸೂರಜ್ ಕಾಪು ಸೇರಿದಂತೆ ಒಟ್ಟು ಎಂಟು ಮಂದಿಯ ತಂಡ ಬೆಳಗ್ಗೆ ಸುಮಾರು 10 ಗಂಟೆಗೆ ಕುವೆಟ್ಟು ಮತ್ತು ಮಡಂತ್ಯಾರು ಗ್ರಾ.ಪಂ. ಕಚೇರಿಗಳಿಗೆ ಆಗಮಿಸಿದೆ.
ಅಧಿಕಾರಿಗಳು ಪಂಚಾಯತ್ನ ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಳ್ಳುವುದರ ಜೊತೆಗೆ ವಿವಿಧ ಕಡತಗಳು ಮತ್ತು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಪರಿಶೀಲನೆ ಸಂಜೆವರೆಗೂ ಮುಂದುವರಿಯಲಿದೆ ಎನ್ನಲಾಗಿದೆ.
ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ಪೂರ್ಣಗೊಂಡ ಬಳಿಕ ದಾಳಿಯ ವೇಳೆ ಪತ್ತೆಯಾದ ದಾಖಲೆಗಳು ಹಾಗೂ ಮುಂದಿನ ಕ್ರಮದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.







Comments