ದಾವಣಗೆರೆ: ಒಳಜಗಳಕ್ಕೆ ಬೇಸತ್ತು ವಿಷ ಸೇವಿಸಿದ್ದ ಮುಖ್ಯ ಶಿಕ್ಷಕ ಚಿಕಿತ್ಸೆ ಫಲಿಸದೆ ಸಾವು
- Jun 17
- 1 min read

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಕ್ಕನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಜಯಪ್ಪ (55) ಅವರು ಸಹಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಯೊಂದಿಗಿನ ಜಗಳದಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಶಾಲೆಯಲ್ಲಿ ಒಳಜಗಳ ನಡೆಯುತ್ತಿತ್ತು. ಮಂಗಳವಾರ ಎಸ್ಡಿಎಂಸಿ ಹಾಗೂ ಗ್ರಾಮದ ಹಿರಿಯರ ಸಮ್ಮುಖದಲ್ಲಿ ರಾಜಿ ಸಂಧಾನ ಸಭೆ ನಡೆಯುತ್ತಿದ್ದಾಗಲೇ ಜಯಪ್ಪ ಅವರು ಶೌಚಾಲಯಕ್ಕೆ ಹೋಗಿ ವಿಷ ಸೇವಿಸಿದ್ದರು.
ಅಸ್ವಸ್ಥರಾಗಿದ್ದ ಅವರನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಬುಧವಾರ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.







Comments