ಹಬ್ಬದ ಸಂಭ್ರಮಕ್ಕೆ ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ

ಮಂಗಳೂರು: ಹಬ್ಬದ ಕಾರ್ಯಕ್ರಮಗಳು ಹಾಗೂ ಮೆರವಣಿಗೆಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಪೊಲೀಸರು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಕಾರ್ಯಕ್ರಮ ಆಯೋಜಕರು ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು. ಖಾಸಗಿ ಜಾಗದಲ್ಲಿ ಕಾರ್ಯಕ್ರಮ ನಡೆಸುವುದಾದರೆ ಜಾಗದ ಮಾಲೀಕರಿಂದ ಎನ್ಒಸಿ ಪಡೆಯುವುದು ಕಡ್ಡಾಯವಾಗಿದೆ.
ಡಿಜೆ ಹಾಗೂ ಅತಿಯಾದ ಶಬ್ದದ ಸ್ಪೀಕರ್ಗಳ ಬಳಕೆಗೆ ಸಂಪೂರ್ಣ ನಿಷೇಧವಿದ್ದು, ಅನುಮತಿಯೊಂದಿಗೆ ಬಳಸುವ ಧ್ವನಿವರ್ಧಕಗಳನ್ನು ರಾತ್ರಿ 10 ಗಂಟೆಯೊಳಗೆ ಬಂದ್ ಮಾಡಬೇಕು. ಮೆರವಣಿಗೆಗಳನ್ನು ರಾತ್ರಿ 11.30ರೊಳಗೆ ಮುಕ್ತಾಯಗೊಳಿಸಬೇಕು. ನಿಗದಿತ ಮಾರ್ಗ ಅಥವಾ ಸ್ಥಳವನ್ನು ಬದಲಾಯಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.
ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ 24x7 ಭದ್ರತೆ ಹಾಗೂ ಸಿಸಿಟಿವಿ ವ್ಯವಸ್ಥೆ ಕಡ್ಡಾಯವಾಗಿದ್ದು, ಸಿಸಿಟಿವಿ ದೃಶ್ಯಗಳನ್ನು ಕನಿಷ್ಠ 30 ದಿನಗಳ ಕಾಲ ಸಂಗ್ರಹಿಸಬೇಕು.
ಧಾರ್ಮಿಕ ಭಾವನೆ ಕೆರಳಿಸುವ ಘೋಷಣೆ, ಬ್ಯಾನರ್ಗಳು ಹಾಗೂ ಸಾಮಾಜಿಕ ಜಾಲತಾಣದ ಪೋಸ್ಟ್ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ಈವ್ಟೀಸಿಂಗ್, ಹಿಂಬಾಲಿಸುವುದು ಹಾಗೂ ಲೈಂಗಿಕ ಕಿರುಕುಳಕ್ಕೆ ಶೂನ್ಯ ಸಹಿಷ್ಣುತೆ ಇರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತುರ್ತು ಸೇವೆ, ಅಗ್ನಿಶಾಮಕ ವ್ಯವಸ್ಥೆ, ಪ್ರಥಮ ಚಿಕಿತ್ಸೆ ಹಾಗೂ ಸಂಚಾರ ನಿಯಂತ್ರಣ ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಆಯೋಜಕರು ಕಡ್ಡಾಯವಾಗಿ ಕೈಗೊಳ್ಳಬೇಕು. ನಿಯಮ ಉಲ್ಲಂಘಿಸಿದಲ್ಲಿ BNS ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ತುರ್ತು ಸಂದರ್ಭದಲ್ಲಿ ಸಾರ್ವಜನಿಕರು 112ಕ್ಕೆ ಕರೆ ಮಾಡುವಂತೆ ಪೊಲೀಸರು ಸೂಚಿಸಿದ್ದಾರೆ.







Comments