ಅತಿಥಿ ಉಪನ್ಯಾಸಕಿಯರಿಗೆ ಮಾತೃತ್ವ ರಜೆ ಭಾಗ್ಯ; ಶಾಲಾ-ಕಾಲೇಜುಗಳಲ್ಲಿ ಬೋಧಕ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್
- Mar 6
- 1 min read

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಆನೆಬಲ ನೀಡಲಾಗಿದ್ದು, ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಬರೋಬ್ಬರಿ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿದ್ದಾರೆ. 'ಉತ್ತಮ ಕಲಿಕೆ ಉಜ್ವಲ ಭವಿಷ್ಯ' ಎಂಬ ಘೋಷವಾಕ್ಯದಡಿ ಮುಂದಿನ ಮೂರು ವರ್ಷಗಳಲ್ಲಿ 3,900 ಕೋಟಿ ರೂ. ವೆಚ್ಚದಲ್ಲಿ ಒಟ್ಟು 800 ಸರ್ಕಾರಿ ಶಾಲೆಗಳನ್ನು 'ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ' (KPS) ಉನ್ನತೀಕರಿಸಲಾಗುವುದು. ಮೂಲಸೌಕರ್ಯಕ್ಕಾಗಿ 565 ಕೋಟಿ ರೂ. ಮೀಸಲಿಡಲಾಗಿದ್ದು, ಹೊಸ ಕೊಠಡಿಗಳ ನಿರ್ಮಾಣ ಹಾಗೂ ಪೀಠೋಪಕರಣಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಉನ್ನತ ಶಿಕ್ಷಣ ಕ್ಷೇತ್ರದಲ್ಲೂ ಕ್ರಾಂತಿಕಾರಿ ಬದಲಾವಣೆ ತರಲು ಮುಂದಾಗಿರುವ ಸರ್ಕಾರ, ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಸೌಲಭ್ಯವನ್ನು ಘೋಷಿಸಿದೆ. ಕಲ್ಯಾಣ ಕರ್ನಾಟಕದ ವಿವಿಧ ಭಾಗಗಳಲ್ಲಿ ಹೊಸ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜುಗಳು ಹಾಗೂ ಬಸವಕಲ್ಯಾಣದಲ್ಲಿ 'ವಚನ ವಿಶ್ವವಿದ್ಯಾಲಯ' ಸ್ಥಾಪನೆಗೆ ನಿರ್ಧರಿಸಲಾಗಿದೆ. ಅಲ್ಲದೆ, IIT ಧಾರವಾಡದ ಸಹಯೋಗದೊಂದಿಗೆ 12 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ 'AI ಡಿಜಿಟಲ್ ಟ್ಯೂಟರ್' ಸೌಲಭ್ಯ ಒದಗಿಸಲು 5 ಕೋಟಿ ರೂ. ವ್ಯಯಿಸಲಾಗುವುದು. ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ಬೆಂಗಳೂರು ಮತ್ತು ಧಾರವಾಡದಲ್ಲಿ ತಲಾ 10 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಡಿಜಿಟಲ್ ಗ್ರಂಥಾಲಯಗಳು ನಿರ್ಮಾಣವಾಗಲಿವೆ.
ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಸಾಮಾಜಿಕ ಸುಧಾರಣೆಗಾಗಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸುವ ಮಹತ್ವದ ನಿರ್ಧಾರವನ್ನು ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುವ ತಾರತಮ್ಯ ತಡೆಯಲು 'ರೋಹಿತ್ ವೇಮುಲ ಕಾಯ್ದೆ' ಜಾರಿಗೆ ತರಲಾಗುವುದು. ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿನಿಯರಿಗೆ 'ದೀಪಿಕಾ ವಿದ್ಯಾರ್ಥಿ ವೇತನ' ಮುಂದುವರಿಸಲಾಗಿದ್ದು, ಅಜೀಂ ಪ್ರೇಮ್ಜಿ ಫೌಂಡೇಶನ್ ಸಹಯೋಗದೊಂದಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಒಟ್ಟಾರೆಯಾಗಿ, ಪ್ರಾಥಮಿಕ ಶಿಕ್ಷಣದಿಂದ ಸಂಶೋಧನೆಯವರೆಗೆ ಸಮಗ್ರ ಅಭಿವೃದ್ಧಿಗೆ ಬಜೆಟ್ ಪೂರಕವಾಗಿದೆ.







Comments