ದಕ್ಷಿಣ ಕನ್ನಡದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ವೇಗ: ದೆಹಲಿಯಲ್ಲಿ ಕೇಂದ್ರ ಕಾರ್ಯದರ್ಶಿಗಳೊಂದಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಚರ್ಚೆ
- Feb 6
- 1 min read

ನವದೆಹಲಿ/ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಇಂದು ನವದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಉಮಾಶಂಕರ್ ಅವರನ್ನು ಭೇಟಿಯಾದ ಸಂಸದರು, ಜಿಲ್ಲೆಯ ಹೆದ್ದಾರಿ ಕಾಮಗಾರಿಗಳ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಸವಿಸ್ತಾರವಾಗಿ ಚರ್ಚಿಸಿದರು. ಯಾವುದೇ ಕಾರಣಕ್ಕೂ ಕಾಮಗಾರಿಗಳು ವಿಳಂಬವಾಗದಂತೆ ಎಚ್ಚರವಹಿಸಿ, ನಿಗದಿತ ಕಾಲಮಿತಿಯೊಳಗೆ ಯೋಜನೆಗಳನ್ನು ಲೋಕಾರ್ಪಣೆಗೊಳಿಸಬೇಕೆಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು.
ಸಭೆಯಲ್ಲಿ ಪ್ರಮುಖವಾಗಿ ಜಿಲ್ಲೆಯ ಜೀವನಾಡಿ ಎನಿಸಿರುವ ಶಿರಾಡಿ ಘಾಟ್ ರಸ್ತೆ ಅಭಿವೃದ್ಧಿ ಹಾಗೂ ಸುರತ್ಕಲ್ - ಬಿ.ಸಿ ರೋಡ್ ಹೆದ್ದಾರಿ ವಿಸ್ತರಣೆಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ (DPR) ಕುರಿತು ಸುದೀರ್ಘ ಸಮಾಲೋಚನೆ ನಡೆಸಲಾಯಿತು. ಈ ಯೋಜನೆಗಳು ಕಾರ್ಯರೂಪಕ್ಕೆ ಬಂದಲ್ಲಿ ಜಿಲ್ಲೆಯ ರಸ್ತೆ ಸಂಪರ್ಕ ವ್ಯವಸ್ಥೆಯಲ್ಲಿ ಕ್ರಾಂತಿಕಾರಕ ಬದಲಾವಣೆ ಬರಲಿದ್ದು, ಸಾರಿಗೆ ವ್ಯವಸ್ಥೆ ಸುಗಮವಾಗಲಿದೆ. ಈ ಹಿನ್ನೆಲೆಯಲ್ಲಿ ಡಿಪಿಆರ್ ಪ್ರಕ್ರಿಯೆಯನ್ನು ತ್ವರಿತಗೊಳಿಸಿ ಅನುಷ್ಠಾನಕ್ಕೆ ವೇಗ ನೀಡುವಂತೆ ಅಧಿಕಾರಿಗಳಿಗೆ ಸಂಸದರು ಸೂಚಿಸಿದರು.
ಇದೇ ವೇಳೆ, ಮಾಣಿ - ಸಂಪಾಜೆ ನಡುವಿನ ರಸ್ತೆಯು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ವ್ಯಾಪ್ತಿಗೆ ಸೇರ್ಪಡೆಗೊಂಡಿರುವುದರಿಂದ, ಅದರ ಸಮಗ್ರ ಅಭಿವೃದ್ಧಿಯ ಬಗ್ಗೆ ವಿಶೇಷ ಗಮನಹರಿಸುವಂತೆ ಸಂಸದರು ಮನವರಿಕೆ ಮಾಡಿಕೊಟ್ಟರು. ಮರುಪರಿಶೀಲನೆ ನಡೆಸಿ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕೆಂದು ಅವರು ಸಭೆಯಲ್ಲಿ ಪ್ರತಿಪಾದಿಸಿದರು. ಈ ಪ್ರಮುಖ ಭೇಟಿಯ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಉಪಸ್ಥಿತರಿದ್ದು, ಜಿಲ್ಲೆಯ ರಸ್ತೆ ಸಮಸ್ಯೆಗಳ ಬಗ್ಗೆ ಧ್ವನಿಗೂಡಿಸಿದರು.







Comments