ರಾಜ್ಯದ ಪೊಲೀಸರಿಗೆ ಭರ್ಜರಿ ಸಿಹಿಸುದ್ದಿ ನೀಡಿದ ಸರಕಾರ
- sathyapathanewsplu
- 4 days ago
- 1 min read

ಹಗಲು-ರಾತ್ರಿ ಎನ್ನದೆ, ಹಬ್ಬ-ಹರಿದಿನಗಳನ್ನು ಲೆಕ್ಕಿಸದೆ ಜನರಿಗಾಗಿ ದುಡಿಯುವ ರಾಜ್ಯದ ಪೊಲೀಸ್ ಸಿಬ್ಬಂದಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದೆ. ಸಿಬ್ಬಂದಿಯ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಮತ್ತು ಅವರ ಕುಟುಂಬದೊಂದಿಗೆ ಸಮಯ ಕಳೆಯಲು ಅನುಕೂಲವಾಗುವಂತೆ, ಇನ್ನು ಮುಂದೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅವರ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವದಂದು ಕಡ್ಡಾಯವಾಗಿ ಸಾಂದರ್ಭಿಕ ರಜೆ ನೀಡಲು ನಿರ್ಧರಿಸಲಾಗಿದೆ. ಈ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರಾದ (DG & IGP) ಡಾ. ಎಂ.ಎ.ಸಲೀಂ ಅವರು ಇಂದು (ಜನವರಿ 29) ಅಧಿಕೃತ ಸುತ್ತೋಲೆ ಹೊರಡಿಸಿದ್ದಾರೆ.
ಸಾರ್ವಜನಿಕರ ಸುರಕ್ಷತೆಗಾಗಿ ಅತ್ಯಂತ ಕಠಿಣ ಪರಿಸ್ಥಿತಿಗಳಲ್ಲಿ ಕಾರ್ಯನಿರ್ವಹಿಸುವ ಪೊಲೀಸರಿಗೆ ತಮ್ಮ ವೈಯಕ್ತಿಕ ಮತ್ತು ಕೌಟುಂಬಿಕ ಜೀವನದ ಸಂಭ್ರಮಗಳಲ್ಲಿ ಭಾಗಿಯಾಗಲು ಸಮಯ ಸಿಗುತ್ತಿರಲಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಡಿಜಿ-ಐಜಿಪಿ ಅವರು, ಸಿಬ್ಬಂದಿ ತಮ್ಮ ವಿಶೇಷ ದಿನಗಳಂದು ರಜೆ ಕೋರಿದಲ್ಲಿ ಯಾವುದೇ ಕಾರಣಕ್ಕೂ ನಿರಾಕರಿಸದಂತೆ ಎಲ್ಲಾ ಘಟಕಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಕ್ರಮವು ಅಧಿಕಾರಿಗಳು ಮತ್ತು ಸಿಬ್ಬಂದಿ ಭಾವನಾತ್ಮಕವಾಗಿ ಪುನಶ್ಚೇತನಗೊಳ್ಳಲು ಹಾಗೂ ಕರ್ತವ್ಯ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನವನ್ನು ಕಾಯ್ದುಕೊಳ್ಳಲು ನೆರವಾಗಲಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಪೊಲೀಸ್ ಇಲಾಖೆಯಲ್ಲಿ ಈ ಮಾನವೀಯ ಬದಲಾವಣೆಯು ಸಿಬ್ಬಂದಿಯ ಮನೋಬಲವನ್ನು ಹೆಚ್ಚಿಸುವುದಲ್ಲದೆ, ಅವರ ಕೆಲಸದ ದಕ್ಷತೆಯನ್ನು ವೃದ್ಧಿಸಲಿದೆ ಎಂಬ ಆಶಯ ವ್ಯಕ್ತವಾಗಿದೆ. ಕೌಟುಂಬಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಸಿಬ್ಬಂದಿಯ ಒತ್ತಡ ಕಡಿಮೆಯಾಗಿ, ಅವರು ಸಾರ್ವಜನಿಕರೊಂದಿಗೆ ಮತ್ತಷ್ಟು ಸೌಜನ್ಯದಿಂದ ವರ್ತಿಸಲು ಸಾಧ್ಯವಾಗುತ್ತದೆ ಎಂದು ಇಲಾಖೆ ಅಭಿಪ್ರಾಯಪಟ್ಟಿದೆ. ಈ ಆದೇಶವು ಕೆಳಹಂತದ ಕಾನ್ಸ್ಟೇಬಲ್ಗಳಿಂದ ಹಿಡಿದು ಉನ್ನತ ಮಟ್ಟದ ಅಧಿಕಾರಿಗಳವರೆಗೂ ಅನ್ವಯವಾಗಲಿದ್ದು, ರಾಜ್ಯದ ಸಾವಿರಾರು ಪೊಲೀಸ್ ಕುಟುಂಬಗಳಲ್ಲಿ ಸಂತಸ ತಂದಿದೆ.






Comments