ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಎನ್ಐಎ ವಶಕ್ಕೆ
- 4 days ago
- 1 min read

ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಯಶಸ್ವಿಯಾಗಿ ಬಂಧಿಸಿದ್ದಾರೆ. ಬೆಳ್ತಂಗಡಿಯ ನೌಶಾದ್ (32) ಮತ್ತು ಕೊಡಗಿನ ಅಬ್ದುಲ್ ನಾಸಿರ್ (41) ಬಂಧಿತ ಆರೋಪಿಗಳಾಗಿದ್ದಾರೆ. ಇವರಿಬ್ಬರ ಸುಳಿವು ನೀಡಿದವರಿಗೆ ಎನ್ಐಎ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿತ್ತು.
ಈ ಆರೋಪಿಗಳು ಕೊಲೆಗೈದಿದ್ದ ಮುಖ್ಯ ಅಪರಾಧಿಗಳಿಗೆ ಮೈಸೂರು, ಚಾಮರಾಜನಗರ ಹಾಗೂ ತಮಿಳುನಾಡಿನ ಈರೋಡ್ನಲ್ಲಿ ಅಡಗಿಕೊಳ್ಳಲು ಆಶ್ರಯ ನೀಡಿ ಸಹಾಯ ಮಾಡಿದ್ದರು. ತೀವ್ರ ಶೋಧ ನಡೆಸಿದ ಎನ್ಐಎ ಅಧಿಕಾರಿಗಳು, ತಮಿಳುನಾಡಿನಲ್ಲಿ ನೌಶಾದ್ನನ್ನು ಹಾಗೂ ಕೇರಳದ ಕೊಚ್ಚಿಯಲ್ಲಿ ಅಬ್ದುಲ್ ನಾಸಿರ್ನನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ಒಟ್ಟು 27 ಆರೋಪಿಗಳ ಪಟ್ಟಿಯಲ್ಲಿ ಇವರ ಹೆಸರಿತ್ತು.
2022 ರ ಜುಲೈ 26 ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರುರನ್ನು ಮಾರಾಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಇಡೀ ಕರಾವಳಿ ಜಿಲ್ಲೆಗಳಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಈ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ಚುರುಕುಗೊಳಿಸಿದ್ದು, ಇದೀಗ ಪ್ರಮುಖ ಸಂಚುಗಾರರನ್ನು ಕಟಕಟೆಗೆ ತಂದು ನಿಲ್ಲಿಸಿದೆ.







Comments