ನಟ ದರ್ಶನ್ಗೆ ಸುಪ್ರೀಂಕೋರ್ಟ್ ಶಾಕ್ ಜಾಮೀನು ನಿರಾಕರಣೆ; ಇನ್ನೂ ಒಂದು ವರ್ಷ ಜೈಲುವಾಸ ಸಾಧ್ಯತೆ!

ನವದೆಹಲಿ: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲಿನಲ್ಲಿ ಇರುವ ನಟ ದರ್ಶನ್ ಅವರಿಗೆ ಸುಪ್ರೀಂಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದೆ. ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಸದ್ಯಕ್ಕೆ ಯಾವುದೇ ರಿಲೀಫ್ ನೀಡಲು ನಿರಾಕರಿಸಿದ್ದು, ಪ್ರಕರಣದ ಗಂಭೀರತೆಯನ್ನು ಉಲ್ಲೇಖಿಸಿ ಜಾಮೀನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
ಪ್ರಕರಣದ ತನಿಖೆ ಹಾಗೂ ಲಭ್ಯವಿರುವ ಸಾಕ್ಷ್ಯಾಧಾರಗಳ ಹಿನ್ನಲೆಯಲ್ಲಿ ತಕ್ಷಣದ ಬಿಡುಗಡೆ ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ಒಂದು ವರ್ಷದ ನಂತರವಷ್ಟೇ ಮತ್ತೆ ಜಾಮೀನಿಗಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ತಿಳಿಸಿದೆ. ಇದೇ ವೇಳೆ, ಒಂದು ವರ್ಷದೊಳಗೆ ಸುಮಾರು 60 ಸಾಕ್ಷಿಗಳ ವಿಚಾರಣೆಯನ್ನು ಪೂರ್ಣಗೊಳಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ ನೀಡಲಾಗಿದೆ.
ಕೆಳ ಹಂತದ ನ್ಯಾಯಾಲಯಗಳಲ್ಲಿ ಜಾಮೀನು ಸಿಗದ ಹಿನ್ನೆಲೆ ದರ್ಶನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿಯೂ ನಿರೀಕ್ಷಿತ ರಿಲೀಫ್ ದೊರೆಯದೇ ಇರುವುದರಿಂದ, ಮುಂದಿನ ದಿನಗಳಲ್ಲಿ ಅವರ ಜೈಲುವಾಸ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಕಾನೂನು ವಲಯಗಳಲ್ಲಿ ಚರ್ಚೆಯಾಗುತ್ತಿದೆ.
ಇನ್ನೊಂದೆಡೆ, ಜಾಮೀನು ನಿರಾಕರಿಸಿದರೂ ಮಾನವೀಯ ನೆಲೆಯಲ್ಲಿ ದರ್ಶನ್ ಅವರಿಗೆ ಜೈಲಿನಲ್ಲಿ ಕಾನೂನುಬದ್ಧವಾಗಿ ಸಿಗಬೇಕಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸುಪ್ರೀಂಕೋರ್ಟ್ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಆಹಾರ, ವೈದ್ಯಕೀಯ ಚಿಕಿತ್ಸೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ನಿಯಮಾನುಸಾರ ಒದಗಿಸಲು ಸೂಚಿಸಲಾಗಿದೆ.
ಇಂದಿನ ತೀರ್ಪಿನಿಂದ ದರ್ಶನ್ ಅಭಿಮಾನಿಗಳು ಹಾಗೂ ಕುಟುಂಬಸ್ಥರಿಗೆ ಭಾರೀ ನಿರಾಸೆಯಾಗಿದೆ. ಜೈಲಿನಿಂದ ಬಿಡುಗಡೆಗಾಗಿ ಕಾಯುತ್ತಿದ್ದವರಿಗೆ ಸುಪ್ರೀಂಕೋರ್ಟ್ನ ಈ ನಿಲುವು ದೊಡ್ಡ ಆಘಾತ ನೀಡಿದಂತಾಗಿದೆ.







Comments