ಗಡೀಪಾರು ಆದೇಶಕ್ಕೆ ಸುಪ್ರೀಂ ಅಸ್ತು: ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ತೀವ್ರ ಹಿನ್ನಡೆ
- 3 days ago
- 1 min read

ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಹೊರಡಿಸಲಾಗಿದ್ದ ಈ ಆದೇಶವನ್ನು ಪ್ರಶ್ನಿಸಿ ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸುವ ಮೂಲಕ ಅವರಿಗೆ ತೀವ್ರ ಹಿನ್ನಡೆಯುಂಟಾಗಿದೆ.
ಈ ಹಿಂದೆ ಹೈಕೋರ್ಟ್ನ ಏಕಸದಸ್ಯ ಪೀಠ ಮತ್ತು ಮುಖ್ಯ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ಪೀಠಗಳು ಸಹ ಈ ಗಡೀಪಾರು ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿ, ಅರ್ಜಿಯನ್ನು ತಿರಸ್ಕರಿಸಿದ್ದವು. ಹೈಕೋರ್ಟ್ನ ಈ ತೀರ್ಪನ್ನೇ ಇದೀಗ ಸುಪ್ರೀಂ ಕೋರ್ಟ್ ಸಮರ್ಥಿಸಿದೆ. ಸಮಾಜದಲ್ಲಿ ಅಶಾಂತಿ ಮತ್ತು ಕಾನೂನು ಉಲ್ಲಂಘನೆಯ ಆರೋಪದಡಿ ಪುತ್ತೂರು ಎಸಿ ಅವರು ಕಳೆದ ಮಾರ್ಚ್ನಲ್ಲಿ ಮೂರನೇ ಬಾರಿ ಈ ಆದೇಶ ಹೊರಡಿಸಿದ್ದರು.
ತಿಮರೋಡಿ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ 32ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಸಾರ್ವಜನಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಈ ಕಠಿಣ ಕ್ರಮ ಕೈಗೊಂಡಿದ್ದರು. 2025ರ ಸೆಪ್ಟೆಂಬರ್ನಲ್ಲಿ ಮೊದಲ ಬಾರಿಗೆ ಒಂದು ವರ್ಷದ ಅವಧಿಗೆ ರಾಯಚೂರು ಜಿಲ್ಲೆಯ ಮಾನ್ವಿಗೆ ಸ್ಥಳಾಂತರಿಸಲು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಆದೇಶಿಸಿದ್ದರು. ಸದ್ಯ ಸುಪ್ರೀಂ ಕೋರ್ಟ್ನ ಈ ನಿರ್ಧಾರದಿಂದಾಗಿ ತಿಮರೋಡಿ ಅವರು ಗಡೀಪಾರು ಶಿಕ್ಷೆಯನ್ನು ಎದುರಿಸುವುದು ಅನಿವಾರ್ಯವಾಗಿದೆ.







Comments