ಉಳ್ಳಾಲದಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರ ಬಂಧನ

ಉಳ್ಳಾಲ: ಮಧ್ಯರಾತ್ರಿ ಮದ್ಯಪಾನದ ಮತ್ತಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರೌಡಿಶೀಟರ್ ಸೇರಿ ಇಬ್ಬರನ್ನು ಮಂಗಳೂರು ಪೊಲೀಸರು ಶನಿವಾರ ತಡರಾತ್ರಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮಾರ್ಗತಲೆ ಉಳ್ಳಾಲ ನಿವಾಸಿ ಹಾಗೂ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಮಹಮ್ಮದ್ ಶಕೀರ್ (31) ಮತ್ತು ಮಂಚಿಲ ಉಳ್ಳಾಲ ನಿವಾಸಿ, ಆಟೋ ಚಾಲಕ ಅಶ್ಫಾಕ್ (28) ಎಂದು ಗುರುತಿಸಲಾಗಿದೆ.

ಶನಿವಾರ ತಡರಾತ್ರಿ ಸುಮಾರು 12ರಿಂದ 12.20ರ ನಡುವೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಮ್ಮದ್ ಶಕೀರ್ ಮದ್ಯ ಸೇವಿಸಿ ಕತ್ತಿ ಹಿಡಿದು ಸಾರ್ವಜನಿಕರ ಮೇಲೆ ದಾಳಿ ಮಾಡುವ ರೀತಿಯಲ್ಲಿ ರಂಪಾಟ ನಡೆಸಿ ಬೆದರಿಕೆ ಹಾಕುತ್ತಿದ್ದನು. ಈ ಘಟನೆಯ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.







Comments